ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಮಿಂಚಿನ ಭೇಟಿ ನೀಡಿದ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರಿನ ವಿವಿಧ ಆಸ್ಪತ್ರೆ-ಲ್ಯಾಬ್‌ಗಳಿಗೆ ಮಿಂಚಿನ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಜನರ ಸ್ಯಾಂಪಲ್‌ಗಳನ್ನು ಸ್ವೀಕರಿಸಿದ 24 ಗಂಟೆಯೊಳಗೆ ರಿಸಲ್ಟ್‌ ಕೊಡಬೇಕು ಎಂದು ತಾಕೀತು ಮಾಡಿದರು.

ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಮಿಂಚಿನ ಭೇಟಿ ನೀಡಿದ ಡಿಸಿಎಂ ಅಶ್ವತ್ಥನಾರಾಯಣ
Linkup
ಬೆಂಗಳೂರು: ಕೋವಿಡ್‌ ಎರಡನೇ ಅಲೆಯಿಂದ ನಗರದ ಜನರು ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಆಸ್ಪತ್ರೆ-ಲ್ಯಾಬ್‌ಗಳಿಗೆ ಮಿಂಚಿನ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಜನರ ಸ್ಯಾಂಪಲ್‌ಗಳನ್ನು ಸ್ವೀಕರಿಸಿದ 24 ಗಂಟೆಯೊಳಗೆ ರಿಸಲ್ಟ್‌ ಕೊಡಬೇಕು ಎಂದು ತಾಕೀತು ಮಾಡಿದರು. ಬೆಳಗ್ಗೆಯಿಂದಲೇ ಮಲ್ಲೇಶ್ವರದ ಕೆ.ಸಿ ಜನರಲ್‌ , ರಾಜಾಜಿನಗರದ ಇಎಸ್‌ಐ, ಲೈಫ್‌ಸೆಲ್ ಲ್ಯಾಬ್‌, ವಿಕ್ಟೋರಿಯಾ ಹಾಗೂ ಕಿದ್ವಾಯಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅವರು; ಅಲ್ಲಿನ ಕೋವಿಡ್‌ ವ್ಯವಸ್ಥೆ, ಚಿಕಿತ್ಸೆ, ಲ್ಯಾಬ್‌, ಲಸಿಕೆ ನೀಡಿಕೆ ಮೊದಲಾದ ಅಂಶಗಳನ್ನು ಪರಿಶೀಲನೆ ನಡೆಸಿದರು. ಪ್ರತಿ ದಿನವೂ ಲ್ಯಾಬ್‌ಗಳಿಗೆ ಕನಿಷ್ಠ 3 ಬ್ಯಾಚ್‌ಗಳಲ್ಲಿ ಸ್ಯಾಂಪಲ್‌ ಕಳಿಸಬೇಕು ಹಾಗೂ ಆ ಸ್ಯಾಂಪಲ್‌ ಸ್ವೀಕರಿಸಿದ 24 ಗಂಟೆಯೊಳಗೆ ಲ್ಯಾಬ್‌ಗಳು ರಿಸಲ್ಟ್‌ ಕೊಡಬೇಕು ಎಂದು ಡಿಸಿಎಂ ಅವರು, ಆಸ್ಪತ್ರೆಗಳ ಹಿರಿಯ ವೈದ್ಯಾಧಿಕಾರಿಗಳು, ಆಡಳಿತ ವರ್ಗದವರಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಒಂದು ಕಡೆ ನಿರಂತರವಾಗಿ ಗಂಟಲು ದ್ರವ ಇತ್ಯಾದಿ ಕಲೆಕ್ಟ್ ಮಾಡುತ್ತಿದ್ದರೆ, ಮತ್ತೊಂದೆಡೆ ಪ್ರತಿ 3 ಗಂಟೆಗೊಮ್ಮೆ ಲ್ಯಾಬ್‌ಗಳು ರಿಸಲ್ಟ್‌ ಕೊಡುತ್ತಿರಲೇಬೇಕು. ಸ್ಯಾಂಪಲ್‌ ಕೊಟ್ಟ 24 ಗಂಟೆಯೊಳಗೆ ಫಲಿತಾಂಶ ಸಿಕ್ಕರೆ ಸೋಂಕಿಗೆ ಒಳಗಾದವರು ತಕ್ಷಣವೇ ಚಿಕಿತ್ಸೆ ಪಡೆಯಬಹುದು. ಆಗ ಜೀವಕ್ಕೆ ಹಾನಿಯಾಗುವವುದಿಲ್ಲ ಎಂದು ಡಿಸಿಎಂ ಅವರೆಲ್ಲರಿಗೂ ಮನವರಿಕೆ ಮಾಡಿಕೊಟ್ಟರು. ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆ ಇಲ್ಲ: ನಗರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಕೋವಿಡ್‌ ಮೆಡಿಕಲ್‌ ಕಿಟ್‌ ಪೂರೈಕೆಯಲ್ಲಿ ಕೊರತೆ ಇದೆ. ಖರೀದಿಯಲ್ಲಿ ಕೊಂಚ ಏರುಪೇರಾಗಿದೆ. ಅದೆಲ್ಲವನ್ನೂ ಸರಿಪಡಿಸಲಾಗುತ್ತದೆ. ಆದರೆ, ಇಲ್ಲಿ ಆಮ್ಲಜನಕ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಈ ಆಸ್ಪತ್ರೆಯಲ್ಲಿ ದಿನಕ್ಕೆ ಐದಾರು ಬ್ಯಾಚ್‌ನಲ್ಲಿ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳಿಸಲಾಗುತ್ತದೆ ಎಂದು ವೈದ್ಯರು ಡಿಸಿಎಂಗೆ ಮಾಹಿತಿ ನೀಡಿದರು. ಇನ್ನೂ ಹೆಚ್ಚು ಬ್ಯಾಚ್‌ಗಳಲ್ಲಿ ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳಿಸಿ ಎಂದು ಡಿಸಿಎಂ ಸೂಚಿಸಿದರು. ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ 8 ಸಾವಿರ ಲೀಟರ್ ಸಾಮರ್ಥ್ಯದ ಆ್ಯಕ್ಸಿಜನ್ ಪ್ಲಾಂಟ್ ಇದೆ. ನಿತ್ಯವೂ 4 ಸಾವಿರ ಲೀಟರ್‌ ಬಳಕೆ ಆಗುತ್ತಿದೆ ಎಂದು ಡಿಸಿಎಂಗೆ ಆಸ್ಪತ್ರೆ ಸೂಪರಿಂಟೆಂಡೆಂಟ್ ಡಾ.ವೆಂಕಟೇಶಯ್ಯ ಮಾಹಿತಿ ನೀಡಿದರು. ಸೋಂಕು ಬಂದಾಗ ಜನರು ನಿರ್ದಿಷ್ಟ ಆಸ್ಪತ್ರೆಯೇ ಬೇಕು ಅಂತ ಹುಡುಕಬಾರದು. ಕೆ.ಸಿ ಜನರಲ್‌ನಲ್ಲಿ 120 ವೆಂಟಿಲೇಟರ್ ಇದೆ. 450 ಬೆಡ್‌ಗಳಿವೆ, ಅದರಲ್ಲಿ 180ಕ್ಕೂ ಹೆಚ್ಚು ಹಾಸಿಗೆಗಳನ್ನು ಕೋವಿಡ್ʼಗೆ ಮೀಸಲಿಡಲಾಗಿದೆ. ಇನ್ನೂ 100 ಬೆಡ್ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು. ಲೈಫ್‌ಸೆಲ್‌ಗೆ 3 ಬ್ಯಾಚ್‌ ಸ್ಯಾಂಪಲ್‌: ಈವರೆಗೆ ದಿನಕ್ಕೆ ಒಮ್ಮೆ ಮಾತ್ರ ಕೋವಿಡ್‌ ಸ್ಯಾಂಪಲ್‌ ಸ್ವೀಕರಿಸುತ್ತಿದ್ದ ರಾಜಾಜಿನಗರದ ಲೈಫ್ ಸೆಲ್ ಲ್ಯಾಬ್, ಈಗ 3 ಬ್ಯಾಚ್‌ಗಳಲ್ಲಿ ಸ್ಯಾಂಪಲ್‌ ಕಳಿಸಿದರೂ ಪರೀಕ್ಷೆ ಮಾಡಿ ರಿಸಲ್ಟ್‌ ಕೊಡಲು ಮುಂದೆ ಬಂದಿದೆ. ಡಿಸಿಎಂ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಯೋಗಾಲಯದ ತಜ್ಞರು ಈ ಭರವಸೆ ನೀಡಿದರು. ಇಂದಿನಿಂದಲೇ 3 ಬ್ಯಾಚ್‌ ಸ್ಯಾಂಪಲ್‌ ಸ್ವೀಕರಿಸಲು ಆಸ್ಪತ್ರೆ ಸಿದ್ಧವಾಗಿದ್ದು, ಈವರೆಗೆ ಲ್ಯಾಬಿಗೆ ಸ್ಯಾಂಪಲ್‌ ಹೋದ ಮೇಲೆ ರಿಸಲ್ಟ್‌ ಬರುವುದು 48ರಿಂದ 70 ಗಂಟೆ ಆಗುತ್ತಿತ್ತು. ಈ ವಿಳಂಬದಿಂದ ರೋಗವೂ ಉಲ್ಬಣವಾಗುತ್ತಿತ್ತಲ್ಲದೆ ಪ್ರಾಣಕ್ಕೆ ಹಾನಿ ಉಂಟು ಮಾಡುತ್ತಿತ್ತು. ಬೇಗ ರಿಸಲ್ಟ್‌, ಬೇಗ ಚಿಕಿತ್ಸೆ ಪಡದರೆ ಜೀವಕ್ಕೆ ಹಾನಿಯಾಗದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.