ಬೃಹತ್ ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ- ಬಸವರಾಜ ಬೊಮ್ಮಾಯಿ

ಬೆಂಗಳೂರು ಅಭಿವೃದ್ಧಿ ಸಂಬಂಧ ಜನರಿಂದ ಸಲಹೆ ಸೂಚನೆಗಳನ್ನು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ. ಬೆಂಗಳೂರಿನ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಮೊಬೈಲ್‌ನಲ್ಲಿ ಲಭ್ಯವಾಗುವಂತೆ ಮಾಲಾಗುತ್ತಿದೆ ಎಂದು ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಬೃಹತ್ ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ- ಬಸವರಾಜ ಬೊಮ್ಮಾಯಿ
Linkup
ಬೆಂಗಳೂರು: ಬೃಹತ್ ನಗರದ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿವನಗರ 1 ಮತ್ತು 8ನೇ ಮುಖ್ಯರಸ್ತೆ ಕೂಡು ಸ್ಥಳದಲ್ಲಿ 71.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇಂಟಿಗ್ರೇಟೆಡ್ ಮೇಲ್ಸೇತುವೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜನರಿಂದ ಸಲಹೆ ಸೂಚನೆಗಳನ್ನು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ. ಬೆಂಗಳೂರಿನ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಮೊಬೈಲ್‌ನಲ್ಲಿ ಲಭ್ಯವಾಗುವಂತೆ ಮಾಲಾಗುತ್ತಿದ್ದು, ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಶೀಘ್ರದಲ್ಲಿಯೇ ಎಲ್ಲಾ 28 ಕ್ಷೇತ್ರಗಳಲ್ಲಿ ಈ ಸೇವೆಗಳನ್ನು ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು. ಅತಿ ಹೆಚ್ಚು ಜನದಟ್ಟಣೆ ಇರುವ ಶಿವನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಹನದಟ್ಟನೆ ಕಡಿಮೆ ಮಾಡಲು ಇಂಟಿಗ್ರೇಟೆಡ್ ಮೇಲ್ಸೇತುವೆ ಬಹಳ ಸಹಕಾರಿಯಾಗಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಡಾವಣೆಯನ್ನು ಒಟ್ಟುಗೂಡಿಸಿರುವ ಕೆಲಸ ಅಭಿನಂದನೀಯ. ತುಮಕೂರು - ಮೈಸೂರು ಹೆದ್ದಾರಿ ಹೈ ಡೆನ್ಸಿಟಿ ಕಾರಿಡಾರ್ ಆಗಿದ್ದು, ವೆಸ್ಟ್ ಆಫ್ ಕರ್ಡ್ ರೋಡ್ ಬಳಿ ವಾಹನ ದಟ್ಟಣೆ ಜಾಸ್ತಿ ಇರುತ್ತದೆ. ಸ್ಯಾಂಡಲ್‌ ಸೋಪ್ ಫ್ಯಾಕ್ಟರಿಯಿಂದ ಮೈಸೂರು ರೋಡ್ ತನಕ ತಡೆರಹಿತ ರಸ್ತೆ ನಿರ್ಮಾಣ ಮಾಡಲು ಬಸವೇಶ್ವರ ನಗರ ಲಿಂಕ್ ಮಾಡುವ ಮಹತ್ವದ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪರಿಹಾರ ನೀಡಿದರೆ ಜನಸ್ಪಂದನೆಯುಳ್ಳ ಜನಪರ ಸರ್ಕಾರ ಎನಿಸಿಕೊಳ್ಳುತ್ತದೆ. ನಗರ ಯೋಜನೆಯ ದೃಷ್ಟಿಕೋನ ಬದಲಾವಣೆ ಆಗಿ, ಬೆಂಗಳೂರಿನ ಯೋಜನಾಬದ್ಧ ಸಮಗ್ರ ಅಭಿವೃದ್ಧಿಯಾಗಬೇಕು ಎಂದ ಅವರು, ಬಂಡವಾಳ ಹೂಡಿಕೆ, ಪ್ರವಾಸೋದ್ಯಮ ಮುಂತಾದ ಎಲ್ಲ ಕ್ಷೇತ್ರಗಳಿಗೂ ಬೆಂಗಳೂರನ್ನು ಗುರುತಿಸಲಾಗುತ್ತದೆ. ಆದ್ದರಿಂದ ಅಂತಾರಾಷ್ಟ್ರೀಯ ಮಟ್ಟದ ಸೇವೆಯನ್ನು ನೀಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಯೋಜನಾಬದ್ದ ಹಾಗೂ ಹೊಸ ಚಿಂತನೆಯ ಬೆಂಗಳೂರು ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು. ಮಾಜಿ ಸಚಿವ, ಶಾಸಕ ಕೆ. ಸುರೇಶ್ ಕುಮಾರ್ ಅವರು ಕೆಳಹಂತದ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ನಾಗರಿಕ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸಮಸ್ಯೆಗಳ ಪರಿಹಾರದ ಜೊತೆಗೆ ಅವರು ಸದಾ ಇರುತ್ತಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜಕಾಲುವೆ, ಕರೆಗಳನ್ನು ನಿರ್ಮಿಸುವ ಮೂಲಕ, ತಗ್ಗು ಪ್ರದೇಶದಲ್ಲಿ ನೀರು ಹರಿಯದಂತೆ ತಡೆಯುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡು ಬೆಂಗಳೂರನ್ನು ಸುರಕ್ಷಿತ, ಸುಂದರ, ಹಸಿರು ನಗರವನ್ನಾಗಿಸಲು ನಮ್ಮ ಸರ್ಕಾರವು ಬದ್ಧವಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ವಿ. ಸೋಮಣ್ಣ, ಕೆ. ಗೋಪಾಲಯ್ಯ , ಶಾಸಕ ಕೆ. ಸುರೇಶ್ ಕುಮಾರ್, ಸಂಸದರಾದ ಪಿ.ಸಿ. ಮೋಹನ್, ಎಲ್. ಹನುಮಂತಯ್ಯ, ಮುಖ್ಯ ಆಯುಕ್ತ ಗೌರವ ಗುಪ್ತಾ ಮತ್ತಿತರು ಉಪಸ್ಥಿತರಿದ್ದರು.