ರಮೇಶ್ ಜಾರಕಿಹೊಳಿ ಅಶ್ಲೀಲ ಸಿ.ಡಿ ಪ್ರಕರಣ; ಕಮಲ್ ಪಂತ್ ಸೇರಿ ಮೂವರ ವಿರುದ್ಧದ ತನಿಖೆ ರದ್ದು- ಹೈಕೋರ್ಟ್
ರಮೇಶ್ ಜಾರಕಿಹೊಳಿ ಅಶ್ಲೀಲ ಸಿ.ಡಿ ಪ್ರಕರಣ; ಕಮಲ್ ಪಂತ್ ಸೇರಿ ಮೂವರ ವಿರುದ್ಧದ ತನಿಖೆ ರದ್ದು- ಹೈಕೋರ್ಟ್
ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪಕ್ಕೆ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಿನೇಶ್ ಕಲ್ಲಹಳ್ಳಿ ನೀಡಿದ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ ಎಂದು ಆಕ್ಷೇಪಿಸಿ ಜನಾಧಿಕಾರ ಸಂಘರ್ಷ ಪರಿಷತ್ನ ಆದರ್ಶ್ ಐಯ್ಯರ್ ಮ್ಯಾಜಿಸ್ಪ್ರೇಟ್ ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸದ ಆರೋಪಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.
ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಮಾರುತಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿತು. ‘ದೂರುದಾರ ಎಲ್ಲ ಸಂಗತಿಗಳನ್ನು 8ನೇ ಎಸಿಎಂಎಂ ಕೋರ್ಟ್ ಗಮನಕ್ಕೆ ತರದೆ ದೂರು ದಾಖಲಿಸಿದ್ದಾರೆ. ಹೀಗಿರುವಾಗ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ ಅರ್ಜಿದಾರ ಪೊಲೀಸ್ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆಂಬ ನಿರ್ಧಾರಕ್ಕೆ ಬಂದು, ಅವರ ವಿರುದ್ಧ ತನಿಖೆಗೆ ಆದೇಶಿಸಿರುವ ಮ್ಯಾಜಿಸ್ಪ್ರೇಟ್ ಕ್ರಮ ಸರಿಯಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟು ಅರ್ಜಿದಾರ ಅಧಿಕಾರಿಗಳ ವಿರುದ್ಧದ ತನಿಖೆ ರದ್ದುಪಡಿಸಿದೆ.
ಅರ್ಜಿದಾರ ಪೊಲೀಸ್ ಅಧಿಕಾರಿಗಳ ಪರ ವಕೀಲ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿ, ವಿಚಾರಣಾ ನ್ಯಾಯಾಲಯದಲ್ಲಿ ಹೇಗೆ ದೂರುದಾರರು ಪ್ರಕರಣದ ವಿವರಗಳನ್ನು ಮುಚ್ಚಿಟ್ಟಿದ್ದರು ಮತ್ತು ಅಧೀನ ನ್ಯಾಯಾಲಯ ಹೇಗೆ ಪ್ರಕರಣದ ವಿವರಗಳನ್ನು ಗಮನಿಸದೆ ಆದೇಶಿಸಿದೆ ಎಂಬುದನ್ನು ವಿವರಿಸಿದರು. ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪಕ್ಕೆ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಿನೇಶ್ ಕಲ್ಲಹಳ್ಳಿ ನೀಡಿದ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ ಎಂದು ಆಕ್ಷೇಪಿಸಿ ಜನಾಧಿಕಾರ ಸಂಘರ್ಷ ಪರಿಷತ್ನ ಆದರ್ಶ್ ಐಯ್ಯರ್ ಮ್ಯಾಜಿಸ್ಪ್ರೇಟ್ ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.